ಸಾರಿಗೆ ಸಂಸ್ಥೆ, ಎಸ್ಕಾಂ ಪುನಶ್ಚೇತನಕ್ಕೆ ಪ್ರತ್ಯೇಕ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು:ಸಾರಿಗೆ ಹಾಗೂ ಎಸ್ಕಾಂಗಳ ಪುನಶ್ಚೇತನಕ್ಕೆ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಂ.ಆರ್.ಶ್ರೀನಿವಾಸ ಮೂರ್ತಿ ಹಾಗೂ ಕೆ.ಜೈರಾಜ್ ಅವರ ಅಧ್ಯಕ್ಷತೆಯಲ್ಲಿ ಎರಡು ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಾರಿಗೆ ಹಾಗೂ ಎಸ್ಕಾಂಗಳು ಆರ್ಥಿಕವಾಗಿ ಸ್ವಾವಲಂಬನೆಯಾಗಿ ಜನರ ಸೇವೆ, ಸಂಸ್ಥೆ ಕಟ್ಟಲು ಹಾಗೂ ಸರಕಾರದ ಮೇಲೆ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಈ ಸಮಿತಿಗಳನ್ನು ರಚಿಸಲಾಗಿದೆ ಎಂದೂ ಅವರು ಹೇಳಿದರು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ ಆಯೋಜಿಸಿರುವ ವಿದ್ಯುತ್ ಚಾಲಿತ ಬಸ್ಸು ಮತ್ತು ಬಿಎಸ್-6 ಡೀಸೆಲ್ ಬಸ್ಸುಗಳಿಗೆ ವಿಧಾನಸೌಧದ ಪೂರ್ವದ್ವಾರದ ಬಳಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಮಾಲಿನ್ಯ ರಹಿತ ಬಸ್ ಗಳು
ಬಿಎಸ್-6 ನಂತಹ ವಾಹನಗಳನ್ನು ಅಳವಡಿಸಿರುವುದು ಸಂತೋಷದ ವಿಷಯ. ಪರಿಸರ ಮಾಲಿನ್ಯ ಮುಕ್ತ 300 ವಿದ್ಯುತ್ ಚಾಲಿತ ಬಸ್ಗಳನ್ನು ಅಳವಡಿಸುವ ಗುರಿಯನ್ನು ಹೊಂದಿದ್ದು, ಪ್ರಸ್ತುತ 90 ಬಸ್ ಅಳವಡಿಸಲಾಗುತ್ತಿದೆ ಎಂದರು.
ಇವುಗಳ ಸಂಚಾರದಿಂದ ಮಾಲಿನ್ಯ ತಪ್ಪುತ್ತದೆ ಎಂಬ ವಿಶ್ವಾಸವಿದೆ ಹಾಗೂ ಸಾರ್ವಜನಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸುವಂತೆ ಸಿಎಂ ಬೊಮ್ಮಾಯಿ ಮನವಿ ಮಾಡಿದರು.
ಸಾರಿಗೆ ವ್ಯವಸ್ಥೆಯ ಸೋರಿಕೆ ತಡೆಗಟ್ಟಿ, ಸಂಪನ್ಮೂಲ ಸೃಜನೆಗೆ ಒತ್ತು ನೀಡಲು ಹಾಗೂ ಸಂಸ್ಥೆಗಳ ಉತ್ತಮ ಸೇವೆಯ ಮೂಲಕ ಲಾಭದಾಯಕವಾಗಿ ಕಾರ್ಯನಿರ್ವಹಿಸುವ ಕುರಿತು ಸಮಿತಿ ತನ್ನ ಶಿಫಾರಸು ನೀಡಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.



