Latestಮೆಟ್ರೋರಾಜಕೀಯರಾಜ್ಯಸುದ್ದಿ

ಕೃಷಿ ಕಾಯ್ದೆಯಂತೆ ರಾಜ್ಯದಲ್ಲೂ ಎಪಿಎಂಸಿ, ಭೂ ಸುಧಾರಣಾ ಕಾಯ್ದೆ ಹಿಂಪಡೆಯಿರಿ: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕರಾಳ ಕೃಷಿ ಕಾಯ್ದೆಗಳನ್ನು ನರೇಂದ್ರ ಮೋದಿ ಸರ್ಕಾರ ವಾಪಸು ಪಡೆದಂತೆ ರಾಜ್ಯ ಬಿಜೆಪಿ ಸರ್ಕಾರ ಕೂಡಾ ರೈತ ವಿರೋಧಿಯಾಗಿರುವ ಎಪಿಎಂಸಿ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ ಮತ್ತು ಭೂ ಸುಧಾರಣಾ (ತಿದ್ದುಪಡಿ) ಕಾಯ್ದೆಯನ್ನು ತಕ್ಷಣ ವಾಪಸು ಪಡೆಯಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪತ್ರಿಕಾಹೇಳಿಕೆ ಬಿಡುಗಡೆ ಮಾಡಿರುವ ಅವರು, ಎಪಿಎಂಸಿಗಳ ನಿಯಂತ್ರಣವಿಲ್ಲದೆ ಸ್ವತಂತ್ರವಾಗಿ ವ್ಯಾಪಾರ ನಡೆಸುವ ಅವಕಾಶಕ್ಕಾಗಿ ಪ್ರಯತ್ನಿಸುತ್ತಲೇ ಬಂದಿರುವ ಖಾಸಗಿ ಕಂಪೆನಿಗಳಿಗೆ ಹೆಬ್ಬಾಗಿಲು ತೆರೆಯುವುದೇ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆಯ ದುರುದ್ದೇಶವಾಗಿದೆ. ಎಪಿಎಂಸಿಯ ಹೊಸ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರಕ್ಕೆ ಎಂಪಿಎಂಸಿಯಿಂದ ಹೊರಗಿರುವ ವರ್ತಕರ ಮೇಲೆ ಯಾವ ನಿಯಂತ್ರಣವೂ ಇರುವುದಿಲ್ಲ. ಅವರ ವ್ಯವಹಾರದ ಮೇಲೆ ನಿಗಾ ಇಡುವಂತಿಲ್ಲ, ಶುಲ್ಕ, ಸೆಸ್, ಲೆವಿ ಸಂಗ್ರಹಿಸುವಂತಿಲ್ಲ. ಇದು ಸರ್ಕಾರದ ಸಂಪೂರ್ಣ ಶರಣಾಗತಿ ಎಂದರು.

ಪ್ರಸ್ತುತ ಶೇ. 6 ರಷ್ಟು ರೈತರು ಎಪಿಎಂಸಿಗಳಲ್ಲಿ ಬೆಳೆ ಮಾರಾಟ ಮಾಡುತ್ತಿದ್ದು 94% ರೈತರಿಗೆ ಮಾರುಕಟ್ಟೆ ಸೌಲಭ್ಯಗಳಿಲ್ಲ. ರೈತರಿಗೆ ನೆರವಾಗುವ ಉದ್ದೇಶ ಸರ್ಕಾರಕ್ಕಿದ್ದರೆ ಮಾರುಕಟ್ಟೆಗಳಿಲ್ಲದ ಕಡೆಗಳಲ್ಲಿ ಎಪಿಎಂಸಿಯಿಂದ ಪರವಾನಿಗೆ ಪಡೆದು ಮಾರುಕಟ್ಟೆಗಳನ್ನು ಸ್ಥಾಪಿಸಲು ಸರ್ಕಾರ ಉತ್ತೇಜನ ನೀಡಬಹುದಾಗಿದೆ ಎಂದು ತಿಳಿಸಿದರು.

ಭೂಗಳ್ಳರಿಗೆ ನೆರವಾಗಲಿದೆ ಭೂ ಸುಧಾರಣಾ ಕಾಯ್ದೆ

ರೈತರ ಭೂಮಿಗಿದ್ದ ರಕ್ಷಣೆಯನ್ನು ಕಿತ್ತು ಹಾಕಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಭೂಗಳ್ಳರಿಗೆ ನೆರವಾಗುವ ದುರುದ್ದೇಶದ್ದು. ನಮ್ಮ ವಿರೋಧವನ್ನು ಧಿಕ್ಕರಿಸಿ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಲು ಹೊರಟಿದೆ. ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರ ಕೂಡಾ ತನ್ನ ತಪ್ಪನ್ನು ತಿದ್ದಿಕೊಳ್ಳಬೇಕು. ಕೃಷಿ ಭೂಮಿ ಖರೀದಿಗೆ ಇದ್ದ ರೂ.25 ಲಕ್ಷ ಆದಾಯದ ಮಿತಿಯನ್ನು ರದ್ದುಗೊಳಿಸಿ, ಕೃಷಿಕರಲ್ಲದವರು ಕೂಡಾ ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಲು, ಭೂ ಸುಧಾರಣಾ ಕಾಯ್ದೆ 1961ರ ಸೆಕ್ಟನ್ 80 ಮತ್ತು 79 ಎ ಬಿ ಸಿ ಗಳನ್ನು ರದ್ದು ಮಾಡಿರುವ ಬಿಜೆಪಿ ಸರ್ಕಾರ, ರೈತರನ್ನು ಬೀದಿಪಾಲು ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೂ ಸುಧಾರಣಾ ಕಾಯ್ದೆ 1961ರ ಸೆಕ್ಷನ್ A,B,C ಯಡಿಯಲ್ಲಿ ಸುಮಾರು 1.7 ಲಕ್ಷ ಎಕರೆ ಜಮೀನಿಗೆ ಸಂಬಂಧಿಸಿದ 13,814 ಪ್ರಕರಣಗಳು ದಾಖಲಾಗಿತ್ತು. ಭೂ ಸುಧಾರಣೆ ತಿದ್ದುಪಡಿ ಮಸೂದೆಯಿಂದ ಈ ಪ್ರಕರಣಗಳು ರದ್ದಾಗಿ ಸರ್ಕಾರದ ಖಜಾನೆಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಲಿದೆ ಎಂದರು.

ಸದನದ ಒಳಗೆ ಮತ್ತು ಹೊರಗೆ ಈ ಎರಡು ಕರಾಳ ಕಾಯ್ದೆಗಳನ್ನು ರಾಜ್ಯ ಕಾಂಗ್ರೆಸ್ ಪಕ್ಷ ವಿರೋಧಿಸಿದೆ. ಇಂತಹ ಕಾಯ್ದೆಗಳನ್ನು ರೂಪಿಸುವ ಹಂತದಲ್ಲಿ ರೈತ ನಾಯಕರು ಮತ್ತು ವಿರೋಧಪಕ್ಷಗಳ ಜೊತೆ ಚರ್ಚೆ ನಡೆಸುವುದು ಪ್ರಜಾಪ್ರಭುತ್ವದ ನಡವಳಿಕೆ. ಬಿಜೆಪಿ ಸರ್ಕಾರ ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button