ಬಾದಾಮಿ ಬನಶಂಕರಿ ಜಾತ್ರೆ ಹಿನ್ನೆಲೆ: ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಿದ್ದರಾಮಯ್ಯ

ಬಾಗಲಕೋಟೆ : ಕೊರೊನಾ ಮೂರನೇ ಅಲೆಯ ಭೀತಿ ಹಿನ್ನೆಲೆ ಮುಂಜಾಗ್ರತಾ ಕ್ರಮಗಳೊಂದಿಗೆ ಬಾದಾಮಿಯ ಬನಶಂಕರಿ ಜಾತ್ರಾ ಮಹೋತ್ಸವ ಆಚರಿಸುವಂತೆ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಬೆಂಗಳೂರಿ ತಮ್ಮ ನಿವಾಸದಲ್ಲಿ ಚುನಾಯಿತ ಪ್ರತಿನಿಧಿಗಳು ಹಾಗೂ ದೇವಾಲಯದ ಆಡಳಿತ ಮಂಡಳಿ ಸದಸ್ಯರ ಜೊತೆ ಪೂರ್ವಭಾವಿ ಸಭೆ ನಡೆಸಿದರು. ಜಾತ್ರೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಜಾತ್ರೆಯನ್ನು ದೊಡ್ಡ ಪ್ರಮಾಣದಲ್ಲಿ ನೆರವೇರಿಸಲು ಸಾಧ್ಯವಾಗಲಿಲ್ಲ.
ಈ ವರ್ಷವೂ ಕೊರೊನಾ ಮೂರನೇ ಅಲೆ ಬರುವ ಮುನ್ಸೂಚನೆ ಇದೆ ಎಂದು ತಜ್ಞರು ಹೇಳಿದ್ದಾರೆ. ಅವರ ಅಭಿಪ್ರಾಯದ ಪ್ರಕಾರ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈ ಮಧ್ಯೆ 17 ರಂದು ಜಾತ್ರೆಗೆ ದಿನಾಂಕ ನಿಗದಿಯಾಗಿದೆ.
ಬಾದಾಮಿಯಲ್ಲಿ ಕಳೆದ ಮೂರು ತಿಂಗಳಿಂದ ಹೊಸ ಪ್ರಕರಣ ಪತ್ತೆಯಾಗಿಲ್ಲ. ಕ್ಷೇತ್ರದಲ್ಲಿ ಶೇ. ನೂರರಷ್ಟು ಮಂದಿಗೆ ಕೊರೊನಾ ಲಸಿಕೆಯನ್ನು ಮೊದಲ ಡೋಸ್ ನೀಡಲಾಗಿದೆ. ಶೇ. 75 ರಷ್ಟು ಮಂದಿಗೆ ಎರಡನೇ ಡೋಸ್ ಕೊಟ್ಟಿದೆ. ಕ್ಷೇತ್ರದಲ್ಲಿ ಸೋಂಕು ವ್ಯಾಪಕವಾಗಿ ಹರಡದ ರೀತಿ ನೋಡಿಕೊಳ್ಳಬೇಕು. ಲಸಿಕೆಯ ಎರಡನೇ ಡೋಸ್ ಪಡೆದವರಿಗೂ ಕೊರೊನಾ ಸೋಂಕು ಬಂದಿದೆ. ಆದರೆ, ಅವರಲ್ಲಿ ಸೋಂಕಿನ ಪರಿಣಾಮ ಕಡಿಮೆ ಇರುತ್ತದೆ. ಆದರೂ ಮುಂಗಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ.
ಬಾದಾಮಿಯಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳದಿರಲಿ.
ಜಾತ್ರೆಗೆ ಮುನ್ನ ಕೆಲ ಅಭಿವೃದ್ಧಿ ಕೆಲಸಗಳು ಆಗಬೇಕು. ದೇವಾಲಯದ ಮುಂದೆ ಇರುವ ಕಲ್ಯಾಣಿ ಭರ್ತಿಯಾಗಬೇಕು. ಸಾವಿರಾರು ಮಂದಿಗೆ ಜಾತ್ರೆಗೆ ಬರುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು. ಜಾತ್ರೆ ವಿಚಾರದಲ್ಲಿ ಸರ್ಕಾರ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಈ ಸಂಬಂಧ ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.
ಜಾತ್ರೆ ನಡೆಯದಿದ್ದರೆ ಪ್ರತಿ ವರ್ಷ ನಾಟಕ ನಡೆಸುವವರಿಗೆ, ಅಂಗಡಿ ಮುಗ್ಗಟ್ಟುಗಳವರಿಗೆ ಹಾಗೂ ಜೀವನೋಪಾಯಕ್ಕಾಗಿ ಜಾತ್ರೆಯನ್ನೇ ಅವಲಂಬಿಸಿರುವವರಿಗೆ ತೊಂದರೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಬಾದಾಮಿಯ ತಹಸೀಲ್ದಾರ್, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಣಾಧಿಕಾರಿ, ಆರೋಗ್ಯಾಧಿಕಾರಿಗಳು ಸೇರಿದಂತೆ ದೇವಾಲಯದ ಆಡಳಿತ ಮಂಡಳಿಯ ಮುಖ್ಯಸ್ಥರು, ಸದಸ್ಯರು ಸಭೆಯಲ್ಲಿ ಹಾಜರಿದ್ದರು.



