
ಬೆಂಗಳೂರು: ಹಿಂದೂ ಧರ್ಮದೊಳಗಿರುವ ರೋಗಗ್ರಸ್ತ ಮನಸ್ಸುಗಳಿಗೆ ಸಂವಿಧಾನಕ್ಕಿಂತ ಮನುಸ್ಮಂತಿಯೇ ಹೆಚ್ಚು ಪ್ರಿಯವೆನಿಸಿದೆ. ಅದು ಸಾರಿರುವ ಜಾತಿ ವ್ಯವಸ್ಥೆಯ ಬುಡ ಭದ್ರಪಡಿಸುವ ಕೆಲಸವನ್ನು ಈ ವರ್ಗ ಗುಟ್ಟಾಗಿ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಂವಿಧಾನ ದಿನದ ಹಿನ್ನೆಲೆಯಲ್ಲಿ ಎಲ್ಲರಿಗೂ ಶುಭಕೋರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಕೋಮುವಾದ, ಜಾತಿ ತಾರತಮ್ಯ. ಮೂಢ ನಂಬಿಕೆ, ಕಂದಾಚಾರ ಮೊದಲಾದ ಸಾಮಾಜಿಕ ಪಿಡುಗುಗಳೆಲ್ಲ ಮತ್ತೆ ತಲೆಎತ್ತಲು ಪ್ರಯತ್ನಿಸುತ್ತಿರುವ ಈ ಹೊತ್ತಿನಲ್ಲಿ ನಾವು ನಮ್ಮ ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದಿದ್ದಾರೆ.
ಪ್ರಜಾಪ್ರಭುತ್ವ ಉಳಿಯಬೇಕಾದರೆ ಪ್ರತಿದಿನ ನಮಗೆ ಸಂವಿಧಾನದ ದಿನವಾಗಬೇಕು ಎಂದು ಹೇಳೀರುವ ಸಿದ್ದರಾಮಯ್ಯ, ಸಂವಿಧಾನವನ್ನು ಬದಲಾವಣೆ ಮಾಡಲಿಕ್ಕಾಗಿಯೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಕೇಂದ್ರ ಸಚಿವರೊಬ್ಬರು ಬಹಿರಂಗವಾಗಿ ಹೇಳಿಕೆ ನೀಡುತ್ತಾರೆ. ಈ ದೇಶದ ಪ್ರಧಾನಿಯಾಗಲಿ, ಅವರ ಪಕ್ಷವಾಗಲಿ ಬಾಯಿಮಾತಿಗಾದರೂ ಸಚಿವರ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸುವುದಿಲ್ಲ. ಇದರ ಅರ್ಥ ತಮ್ಮ ಬಾಯಿಯಿಂದ ಹೇಳಬೇಕೆಂದಿರುವುದನ್ನು ಅವರು ಈ ಸಚಿವರ ಬಾಯಿಯಿಂದ ಹೇಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಇಂತಹವರಿಗೆ ಸಂವಿಧಾನದ ಮೇಲೆ ಗೌರವ ಇಲ್ಲ, ಅದು ಸಾರುವ ಆಶಯಗಳಲ್ಲಿ ನಂಬಿಕೆ ಇಲ್ಲ. ಸಾಮಾಜಿಕ ನ್ಯಾಯದ ಸಿದ್ಧಾಂತ, ಜಾತಿನಾಶ, ಅಸ್ಪøಶ್ಯತೆಯ ನಿರ್ಮೂಲನೆ ಯಾವುದೂಅವರಿಗೆ ಬೇಕಾಗಿಲ್ಲ. ಪಟ್ಟಭದ್ರ ಹಿತಾಸಕ್ತಿಯನ್ನು ಹೊಂದಿರುವ ಯಥಾಸ್ಥಿತಿವಾದಿಗಳು ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಇಂದು ರಾಷ್ಟ್ರೀಯತೆ ಎಂಬ ಪದ ಹಲವು ವಾದ-ವಿವಾದಗಳು, ಚರ್ಚೆಗಳನ್ನು ಹುಟ್ಟುಹಾಕಿದೆ. ಒಂದು ಸಮುದಾಯ ಅಥವಾ ಒಂದು ಧರ್ಮದ ನೀತಿಗಳೇ ರಾಷ್ಟ್ರೀಯತೆ ಎಂಬಂತೆ ಬಿಂಬಿಸಲಾಗುತ್ತಿದೆ. ಏಕರೂಪದ ಈ ರಾಷ್ಟ್ರೀಯತೆ ನಮ್ಮ ಸಂವಿಧಾನದ ಭದ್ರ ಬುನಾದಿಗೆ ಧಕ್ಕೆಯುಂಟು ಮಾಡಲಿದೆ ಎಂದು ಎಚ್ಚರಿಸಿದ್ದಾರೆ.
ಭಾರತ ಹಲವು ವೈವಿಧ್ಯತೆ, ಆಚಾರ, ವಿಚಾರ, ಸಂಸ್ಕಂತಿಗಳನ್ನು ತನ್ನ ಉದರದಲ್ಲಿ ಕಾಪಿಟ್ಟುಕೊಂಡಿದೆ. ಇಂತಹ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಪಾಡಿಕೊಂಡು ಮುನ್ನಡೆಯಲು ನಾವು ಮತ್ತೊಮ್ಮೆ ಮತ್ತೊಮ್ಮೆ ಸಂಕಲ್ಪ ಮಾಡಬೇಕಾಗಿದೆ ಎಂದು ಪ್ರತಿಪಾದಿಸಿದ್ದಾರೆ.



