
ಬೆಂಗಳೂರು: ಪೊಲೀಸ್ ಇಲಾಖೆ ಅಭಿವೃದ್ಧಿ ಹಾಗೂ ಪೊಲೀಸ್ ಸಿಬ್ಬಂದಿಗಳ ಕ್ಷೇಮಾ ಭಿವೃದ್ದಿ, ನಮ್ಮ ಸರ್ಕಾರದ ಪ್ರಥಮ ಆದ್ಯತೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಗರದ ಸಿಎಆರ್ ಮೈದಾನದಲ್ಲಿ ಪೊಲೀಸ್ ಸಂಸ್ಮರಣಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಗೌರವ ಅರ್ಪಣೆ ಮಾಡಿ ಅವರು ಮಾತನಾಡಿದರು.
ಬೇರೆ ಇಲಾಖೆಗಳಿಗೆ ಇಂತಿಷ್ಟೇ ಕರ್ತವ್ಯದ ಸಮಯ, ಕರ್ತವ್ಯದ ಸ್ವರೂಪಗಳಿರುತ್ತವೆ. ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯವರುಗಳು ದಿನದ 24 ಗಂಟೆಗಳೂ ಕರ್ತವ್ಯ ನಿರ್ವಹಿಸುತ್ತಾರೆ. ಸದಾ ದಕ್ಷತೆಯಿಂದ, ದಣಿವಿಲ್ಲದೆ ಶ್ರಮಿಸುತ್ತಾರೆ. ಇಂದು ನಮ್ಮ ಕರ್ನಾಟಕ ರಾಜ್ಯ ದೇಶದಲ್ಲೇ ಅತ್ಯಂತ ಸುರಕ್ಷಿತ ತಾಣವಾಗಿ ಮಾರ್ಪಟ್ಟಿದೆ ಹಾಗೂ ನಮ್ಮ ಸಮಾಜ ಶಾಂತಿ-ಸೌಹಾರ್ದವಾಗಿದೆ ಎಂದರೆ ಅದಕ್ಕೆ ಪೊಲೀಸರ ಬದ್ಧತೆ ಹಾಗೂ ಕಠಿಣ ಪರಿಶ್ರಮವೇ ಮುಖ್ಯ ಕಾರಣವಾಗಿದೆ ಎಂದರು.
2020-21ನೇ ಸಾಲಿನಲ್ಲಿ ಒಟ್ಟು 123 ಪೊಲೀಸ್ ಸಿಬ್ಬಂದಿಯವರುಗಳು ಮೃತರಾಗಿದ್ದಾರೆ. ಪೊಲೀಸ್ ಗೃಹ 2025 ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿ ಒಟ್ಟು ರೂ 2000 ಕೋಟಿಗಳ ವೆಚ್ಚದಲ್ಲಿ ಒಟ್ಟು 10,034 ವಸತಿಗೃಹಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳಿಗೆ ರಿಯಾಯಿತಿ ದರದಲ್ಲಿ ದಿನಸಿ ಸಾಮಗ್ರಿಗಳನ್ನು ಒದಗಿಸುವ ಪೊಲೀಸ್ ಕ್ಯಾಂಟೀನ್ಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ, ಹುತಾತ್ಮ ಪೊಲೀಸರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಕುಮಾರ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಒಳಗೊಂಡಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಹಾಜರಿದ್ದರು.



