Latestಕಲಬುರ್ಗಿಜಿಲ್ಲಾ ಸುದ್ದಿ
ಪತ್ನಿ ಕೊಂದಿದ್ದ ಪಾಪಿ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಜಿಲ್ಲಾ ನ್ಯಾಯಾಲಯ

ಕಲಬುರಗಿ: ತನ್ನ ಪತ್ನಿಯನ್ನು ಕಬ್ಬಿಣದ ಹಾರೆಯಿಂದ ಹೊಡೆದು ಕೊಲೆ ಮಾಡಿದ ಆಪಾದಿತ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಸಂತೋಷ ಪಾಟೀಲ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಕಲಬುರ್ಗಿಯ ಹೀರಾಪುರದಲ್ಲಿ ಬಾಡಿಗೆಗಿದ್ದ ಸಂತೋಷ ಹಾಗೂ ಆತನ ಪತ್ನಿ ನಡುವೆ ಗಲಾಟೆ ನಡೆದು ಬಾಡಿಗೆ ಮನೆಯಲ್ಲಿಯೇ ಪತ್ನಿ ಸವಿತಾಳಿಗೆ ಹಾರೆಯಿಂದ ಹೊಡೆದು ಕೊಲೆ ಮಾಡಿದ್ದ.ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯ ಪಿಐ ವಾಜೀದ್ ಪಟೇಲ್ ತನಿಖೆ ಮಾಡಿ ನ್ಯಾಯಾಲಯಕ್ಕೆ ದೋಷಾರೋಪಣೆ ವರದಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಮಾಡಿದ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಗದೀಶ್ ವಿ.ಎನ್ ಅವರು, ಕಲಂ 302, 504ರ ಅಡಿಯಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಮೃತಳ ಮಕ್ಕಳ ಪರಿಹಾರಕ್ಕಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಲು ಸೂಚಿಸಿದ್ದಾರೆ. ಸರಕಾರಿ ಅಭಿಯೋಜಕರಾಗಿ ಗುರುಲಿಂಗಪ್ಪ ಶ್ರೀಮಂತ ತೇಲಿ ವಾದ ಮಂಡಿಸಿದ್ದರು.



