ನಮ್ಮನ್ನು ಎಲ್ಲಿ ಬಂಧಿಸುತ್ತಾರೋ, ಅಲ್ಲಿಂದಲೇ ಹೋರಾಟ ಆರಂಭ: ಶಿವಕುಮಾರ್ ಶಪಥ

ಬೆಂಗಳೂರು: ನನ್ನ ಪ್ರಾಣ ಹೋದರೂ ಸರಿ, ರಾಜ್ಯದ ಜನರ ಕುಡಿಯುವ ನೀರಿಗಾಗಿ ಮಾಡುತ್ತಿರುವ ಮೇಕೆದಾಟು ನಡಿಗೆಯನ್ನು ಮಾಡಿಯೇ ತೀರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುನರುಚ್ಛರಿಸಿದ್ದಾರೆ. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಪಾದಯಾತ್ರೆ ಮೊಟಕುಗೊಳಿಸಲು ಷಡ್ಯಂತ್ರ ರೂಪಿಸುತ್ತಿದೆ ಎಂದರು.
ಯೂರೋಪ್ ರಾಷ್ಟ್ರಗಳು ಮತ್ತು ಅಮೆರಿಕದಲ್ಲಿ ಲಕ್ಷಾಂತರ ಕೋವಿಡ್ ಪ್ರಕರಣ ಇದ್ದರೂ ಯಾವುದೇ ನಿರ್ಬಂಧ ಇಲ್ಲ. ಕೇವಲ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಯ್ದುಕೊಂಡು ನಿರ್ವಹಣೆ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ರಾಷ್ಟ್ರವ್ಯಾಪಿ ಕಾರ್ಯಕ್ರಮ, ಸಭೆಗಳನ್ನು ಮಾಡುತ್ತಿದ್ದರೂ ಯಾವುದೇ ನಿರ್ಬಂಧವಿಲ್ಲ. ನಮ್ಮ ರಾಜ್ಯದಲ್ಲಿ ಮಾತ್ರ ವಿಶೇಷವಾಗಿ ಬಿಜೆಪಿ ಕರ್ಫ್ಯೂ ಹಾಕಿದ್ದಾರೆ ಎಂದು ಕಿಡಿಕಾರಿದರು.
ಕೇವಲ ರಾಮನಗರದಲ್ಲಿ ನಿರ್ಬಂಧ!
ನಮ್ಮ ಕಾರ್ಯಕ್ರಮವನ್ನು ಮೊಟಕುಗೊಳಿಸಲು, ಯಾರಿಗೂ ರೂಮ್ ಕೊಡಬೇಡಿ, ಹೊಟೇಲ್, ರೆಸ್ಟೋರೆಂಟ್ ಮುಚ್ಚಿಸುವ ಹಾಗೂ ಮೇಕೆದಾಟು, ಚುಂಚಿ ಫಾಲ್ಸ್, ಬೆಟ್ಟ, ಸಂಗಮ ಮತ್ತಿತರ ಪ್ರವಾಸಿ ತಾಣಗಳಿಗೆ ಯಾರೂ ಹೋಗದಂತೆ ರಾಮನಗರ ಡಿಸಿ ಮೂಲಕ ಆದೇಶ ಹೊರಡಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ನಮ್ಮನ್ನು ಒಂದು ದಿನ ಬಂಧಿಸಬಹುದು. ಮರುದಿನ ಪಾದಯಾತ್ರೆ ತಪ್ಪಿಸಲು ಸಾಧ್ಯವಿಲ್ಲ. ರಾಜಕಾರಣದಲ್ಲಿ ಯಾವುದೂ ಶಾಶ್ವತವಲ್ಲ. ಈ ಹೋರಾಟದಲ್ಲಿ ನಮ್ಮ ಪ್ರಾಣ ಹೋದರೂ ಚಿಂತೆಯಿಲ್ಲ. ನಾವು ನೀರಿಗಾಗಿ ನಡೆಯುತ್ತಿದ್ದು, ಕಾವೇರಿ ಜಲಾನಯನ ಪ್ರದೇಶದ ರೈತರು ಹಾಗೂ ಜನರ ಕುಡಿಯುವ ನೀರಿಗೆ ನಮ್ಮ ಹೊರಾಟ ನಿಲ್ಲಿಸುವುದಿಲ್ಲ ಎಂದು ಶಿವಕುಮಾರ್ ಗುಡುಗಿದರು.
ಆದೇಶ ವಾಪಸ್ಸಸಿಗೆ ಸಿಎಂಗೆ ಪತ್ರ
ರಾಮನಗರ ಜಿಲ್ಲೆ ಹೊರತುಪಡಿಸಿ ರಾಜ್ಯದ ಇತರೆ ಯಾವುದೇ ಜಿಲ್ಲೆಗಳಲ್ಲಿ ಪ್ರವಾಸಿ ತಾಣಗಳಲ್ಲಿ ನಿರ್ಬಂಧ ಹಾಕಿಲ್ಲ. ಕೇವಲ ರಾಮನಗರದ ಸಂಗಮ, ಮೇಕೆದಾಟಿನಲ್ಲಿ ಮಾತ್ರ ನಿರ್ಬಂಧ. ಹೊರಗಿನಿಂದ ಬಂದ ಪ್ರವಾಸಿಗರ ಪರಿಸ್ಥಿತಿ ಏನು? ಪ್ರಶ್ನಿಸಿದ ಶಿವಕುಮಾರ್, ಸರ್ಕಾರ ಕೂಡಲೇ ತನ್ನ ಆದೇಶ ಹಿಂಪಡೆಯಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.
ಸಿಎಂ ನಾಟಕ ಮಂಡಳಿ
ಡಿ.ಕೆ.ಶಿವಕುಮಾರ್ ನಾಟಕೀಯ ಮಾತುಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದಿರುವ ಸಿಎಂ ಹೇಳಕೆಗೆ ಪ್ರತಿಕ್ರಿಯಿಸಿ, ‘ಗುಬ್ಬಿ ವೀರಣ್ಣ ನಾಟಕ ಮಂಡಳಿ ತೆರೆದು ನಾಟಕ ಆಡಿಸುತ್ತಿರುವವರು ಮುಖ್ಯಮಂತ್ರಿಗಳೇ. ಅವರದೇ ನಾಟಕದ ಕಂಪನಿ ಇದೆ. ಇವರೇ ಆದೇಶ ಹೊರಡಿಸಿ ನಾಗಮಂಗಲಕ್ಕೆ ಹೋಗಿ, ಅಲ್ಲಿ ಹೇಗೆ ಕಾರ್ಯಕ್ರಮ ಮಾಡಿದರು? ಸರ್ಕಾರ ನಮ್ಮನ್ನು ಎಲ್ಲಿ ಬಂಧಿಸುತ್ತದೋ ಅಲ್ಲಿಂದಲೇ ನಮ್ಮ ಹೋರಾಟ ಆರಂಭ ಎಂದು ಶಿವಕುಮಾರ್ ಗುಡುಗಿದರು.
ಜೆಡಿಎಸ್ ಅವರಿಗೆ ನಮ್ಮ ಮೇಲೆ ಪ್ರೀತಿ ಜಾಸ್ತಿ. ಅವರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.



