ರಾಜ್ಯದಲ್ಲಿ ಲಾಕ್ಡೌನ್ ಜಾರಿಗೆ ತರುವ ಚಿಂತನೆ ಇಲ್ಲ: ಆರೋಗ್ಯ ಸಚಿವ ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಲಾಕ್ಡೌನ್ ಜಾರಿಗೆ ತರುವ ಚಿಂತನೆ ಇಲ್ಲ. ಲಾಕ್ಡೌನ್ನಿಂದ ಸೋಂಕು ನಿಯಂತ್ರಣ ಆಗುವುದಿಲ್ಲ. ಹೀಗಾಗಿ ರಾಜ್ಯದಲ್ಲಿ ಲಾಕ್ಡೌನ್ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಇನ್ನೂ ಗರಿಷ್ಠ ಮಟ್ಟಕ್ಕೆ ಹೋಗಿಲ್ಲ. ಫೆಬ್ರವರಿ ಮೊದಲ ವಾರ ಹೋಗುತ್ತದೆ. 3 ಅಥವಾ 4ನೇ ವಾರದಿಂದ ಕಡಿಮೆ ಆಗುತ್ತದೆ ಎಂದು ತಜ್ಞರು ಹೇಳಿದ್ದಾರೆ ಎಂದು ತಿಳಿಸಿದರು.
ಲಾಕ್ ಡೌನ್ ಮೂಲಕ ಸೋಂಕು ನಿಯಂತ್ರಣ ಆಗುವುದಿಲ್ಲ. ಎರಡು ಬಾರಿ ಲಾಕ್ಡೌನ್ ಮಾಡಿ ಜನರಿಗೆ ಸಮಸ್ಯೆ ಆಗಿದೆ. ನಿನ್ನೆ ಪ್ರಧಾನಿ ಮೋದಿ ಅವರು ಕೂಡಾ ಆರ್ಥಿಕ ನಷ್ಟ ಆಗದಂತೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ. ಹೀಗಾಗಿ ಲಾಕ್ಡೌನ್ನಂತಹ ಮಾಡದೆ ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ ಎಂದರು.
ಈಗ ಇರುವ ಮಾರ್ಗಸೂಚಿ ಈ ತಿಂಗಳ ಅಂತ್ಯದವರೆಗೂ ಮುಂದುವರೆಯಲಿದೆ. ಸಾರ್ವಜನಿಕರು ಸಹಕರಿಸಬೇಕು. ಯಾರು ನಿರ್ಲಕ್ಷ್ಯ ಮಾಡುವುದು ಬೇಡ. ಮಾಸ್ಕ್ ಕಡ್ಡಾಯವಾಗಿ ಧರಿಸಿ. ಅರ್ಹರು ಮೂರನೇ ಡೋಸ್ ತಗೆದುಕೊಳ್ಳಿ. ಎರಡನೇ ಡೋಸ್ ಯಾರು ತಗೆದುಕೊಂಡಿಲ್ಲ ಅವರೆಲ್ಲ ತಪ್ಪದೆ ಡೋಸ್ ತಗೆದುಕೊಳ್ಳಿ ಎಂದು ಮನವಿ ಮಾಡಿದರು.
