
ಬಾದಾಮಿಯಿಂದ ಮುಂದಿನ ಬಾರಿ ಸಿದ್ದರಾಮಯ್ಯ ಸ್ಪರ್ಧೆ ಅನುಮಾನ ಎಂಬ ಚರ್ಚೆಗಳು ಶುರುವಾಗಿದ್ದವು. ಆದರೆ ಬಾದಾಮಿ ಕಾರ್ಯಕರ್ತರ ಒತ್ತಾಯಕ್ಕೆ ಮಣಿದಿರುವ ಸಿದ್ದರಾಮಯ್ಯ, ಅಂಥ ಅನುಮಾನಕ್ಕೆ ತೆರೆ ಎಳೆದಿದ್ದಾರೆ.
ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಬಾದಾಮಿಯಿಂದಲೇ ಸ್ಪರ್ಧಿಸುವುದಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಾದಾಮಿ ಕ್ಷೇತ್ರದಿಂದ ಬೆಂಗಳೂರಿನ ತಮ್ಮ ನಿವಾಸದವರೆಗೂ ಬಂದು, ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಒತ್ತಡ ಹಾಕಿದ ನೂರಾರು ಕಾರ್ಯಕರ್ತರ ಎದುರು ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರ ತೊರೆದು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎನ್ನುವ ಚರ್ಚೆ ಬೆನ್ನಲ್ಲೇ ಬಾದಾಮಿ ಕ್ಷೇತ್ರದ ನೂರಾರು ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿ, ಸಿದ್ದರಾಮಯ್ಯ ಮತ್ತೆ ಬಾದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಒತ್ತಡ ಹಾಕಿದರು.
ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ, ಸಿದ್ದರಾಮಯ್ಯ ಪರ ಘೋಷಣೆ ಕೂಗಿ, ಮತ್ತೆ ಬಾದಾಮಿಯಿಂದಲೇ ಸಿದ್ದರಾಮಯ್ಯ ಸ್ಪರ್ಧಿಸಬೇಕು ಈ ಬಾರಿ 50ಸಾವಿರ ಮತಗಳಿಂದ ಗೆಲ್ಲಿಸುತ್ತೇವೆ ಎಂದು ಕಾಂಗ್ರೆಸ್ ಮುಖಂಡ ರೇವಣಸಿದ್ದಪ್ಪ ನೋಟಗಾರ ಹೇಳಿದರು.
ನಿನ್ನೆಯಷ್ಟೇ ಸಿದ್ದರಾಮಯ್ಯ, ನಾನು ಚಾಮರಾಜಪೇಟೆ ಅಳಿಯ. ಆಗಾಗ ಚಾಮರಾಜಪೇಟೆಗೆ ಭೇಟಿ ನೀಡುತ್ತಿರುತ್ತೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಚಾಮರಾಜಪೇಟೆಯಲ್ಲಿ ಸ್ಪರ್ಧಿಸುತ್ತಾರಾ ಎನ್ನುವ ಪ್ರಶ್ನೆ ಏಳಲು ಕಾರಣರಾಗಿದ್ದರು. ಇದಾದ ಬೆನ್ನಲ್ಲೇ ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ನೂರಾರು ಅಭಿಮಾನಿಗಳು, ಕಾರ್ಯಕರ್ತರು ಬೆಂಗಳೂರಿಗೆ ದೌಡಾಯಿಸಿದ್ದಾರೆ. ಸಿದ್ದರಾಮಯ್ಯ ನಿವಾಸದಲ್ಲಿ ಜಮಾಯಿಸಿ, ಬಾದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಒತ್ತಡ ಹಾಕಿದರು. ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಾಗಿ ಟಿಕೆಟ್ ಆಕಾಂಕ್ಷಿಗಳು ಈಗಲೇ ಟಿಕೆಟ್ ಗೆ ಸಿದ್ದರಾಮಯ್ಯ ಬಳಿ ಲಾಬಿಗೆ ಮುಂದಾಗಿದ್ದಾರೆ. ಬಾದಾಮಿ ಮತಕ್ಷೇತ್ರದ ಜಿಲ್ಲಾ ಪಂಚಾಯತ್ ತಾಲ್ಲೂಕು ಪಂಚಾಯಿತಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಈಗಿನಿಂದಲೇ ಆಕಾಂಕ್ಷಿಗಳು ತಯಾರಾಗುತ್ತಿದ್ದಾರೆ.
ಬಾದಾಮಿ ಕಾರ್ಯಕರ್ತರ ದುರು ಮಾತನಾಡಿದ ಸಿದ್ದರಾಮಯ್ಯ, ತಾವು ಪ್ರತಿಪಕ್ಷ ನಾಯಕನಾಗಿರುವುದರಿಂದ ಬೇರೆ ಬೇರೆ ಕಡೆ ಓಡಾಡಬೇಕಾಗುತ್ತದೆ. ಐದು ಬಾರಿ ಗೆಲ್ಲಿಸಿದ್ದ ಚಾಮುಂಡೇಶ್ವರಿ ಮತದಾರರು ನನ್ನನ್ನು ಸೋಲಿಸಿದ ಹೊತ್ತಲ್ಲಿ ನೀವು ನನ್ನನ್ನು ಗೆಲ್ಲಿಸಿದ್ದೀರಿ. ನಮ್ಮನ್ನು ನಾನು ಜೀವನದಲ್ಲಿಯೇ ಮರೆಯುವುದು ಸಾಧ್ಯವಿಲ್ಲ ಎಂದೂ ಹೇಳಿದರು.



