
ಕಾಸ್ಗಂಜ್ (ಉತ್ತರಪ್ರದೇಶ): ಪ್ರಕರಣವೊಂದರ ಆರೋಪಿಯಾಗಿದ್ದ ಯುವಕನೋರ್ವ ಠಾಣೆಯೊಳಗೆ ನಿಗೂಢವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆಯ ನಂತರ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ಯುವತಿಯೋರ್ವಳನ್ನು ಅಪಹರಿಸಿ ಬಲವಂತವಾಗಿ ಮದುವೆಯಾದ ಘಟನೆಗೆ ಸಂಬಂಧಿಸಿ ದಾಖಲಾಗಿದ್ದ ಪ್ರಕರಣದಲ್ಲಿ ಅಲ್ತಾಫ್ (22) ಎಂಬ ಯುವಕನನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಸಲಾಗಿತ್ತು.
ಠಾಣೆಯೊಳಗಿದ್ದ ಯುವಕ ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿದ್ದಾನೆ. ಕೆಲ ಹೊತ್ತಿನ ನಂತರ ಆತ ಹಿಂತಿರುಗದಿದ್ದಾಗ ಪೊಲೀಸರು ಒಳಗೆ ಹೋಗಿ ನೋಡಿದ್ದಾರೆ. ಅಲ್ಲಿ ಆತ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಾಗ ಅಲ್ಲಿ ಆತ 5-10 ನಿಮಿಷಗಳಲ್ಲಿ ಮೃತಪಟ್ಟ ಎಂದು ಕಾಸ್ಗಂಜ್ ಪೊಲೀಸ್ ಮುಖ್ಯಸ್ಥ ರೋಹನ್ ಪ್ರಮೋದ್ ಬೋತ್ರೆ ಅವರು ಹೇಳಿಕೆ ನೀಡಿದ್ದಾರೆ.
ಆರೋಪಿಯಾಗಿದ್ದ ಮಗನನ್ನು ಪೊಲೀಸರಿಗೆ ಒಪ್ಪಿಸಿದ್ದೆ. ಆದರೆ ಅವರು ಠಾಣೆಯಲ್ಲಿ ನೇಣು ಹಾಕುವಲ್ಲಿ ಭಾಗಿಯಾಗಿರುವ ಶಂಕೆಯಿದೆ ಎಂದು ಯುವಕನ ತಂದೆ ಆರೋಪಿಸಿದ್ದು, ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದ್ದು, ಅವರ ಮೇಲೆ ನಿರ್ಲಕ್ಷ್ಯದ ಆರೋಪ ಹೊರಿಸಲಾಗಿದೆ.



