ಹಿಜಾಬ್ ಸಂಘರ್ಷ, ಶಿವಮೊಗ್ಗ ಕಾಲೇಜು ಕ್ಯಾಂಪಸ್ಸಿನಲ್ಲಿ ಕೇಸರಿ ಧ್ವಜ ಹಾರಿಸಿದ ಯುವಕ..!

ಬೆಂಗಳೂರು: ಕಾಲೇಜು ಕ್ಯಾಂಪಸ್ಸಿನಲ್ಲಿ ಕೇಸರಿ ಧ್ವಜವನ್ನು ಹಾರಿಸಿರುವ ಪ್ರಕರಣ ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ವಿದ್ಯಾರ್ಥಿಯಂತೆ ಗೋಚರಿಸುವ ಯುವಕನೊಬ್ಬ ತಾರಕಕ್ಕೇರಿದ ವಿದ್ಯಾರ್ಥಿಗಳ ಘೋಷಣೆ, ಕಿರುಚಾಟದ ನಡುವೆ ಕೇಸರಿ ಧ್ವಜವನ್ನು ಹಾರಿಸುತ್ತಿರುವ ಚಿತ್ರಣ ಈ ವಿಡಿಯೋನಲ್ಲಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಜತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಖಂಡನೆ
ಈ ನಡುವೆ ಪ್ರಕರಣ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಪ್ರತಿಯೊಬ್ಬರು ರಾಷ್ಟ್ರಧ್ವಜದೊಡನೆ ತಮ್ಮ ಭಾವಚಿತ್ರವನ್ನು ಪೋಸ್ಟ್ ಮಾಡುವಂತೆ ಜನತೆಗೆ ಮನವಿ ಮಾಡಿದ್ದಾರೆ.
ಈ ನಡುವೆ, ಹಿಜಾಬ್-ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಪರಿಸ್ಥಿತಿ ಕೈ ಮೀರಿದೆ ಎಂದೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಲಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಶಿವಕುಮಾರ್ ಅವರ ಟ್ವೀಟ್ ನ ಪೂರ್ಣಪಾಠ ಈ ರೀತಿ ಇದೆ. ‘ರಾಜ್ಯದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಪರಿಸ್ಥಿತಿ ಕೈ ಮೀರಿದೆ. ಇದರ ಪರಿಣಾಮವಾಗಿ ರಾಷ್ಟ್ರ ಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಲಾಗಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಆನ್ಲೈನ್ ಶಿಕ್ಷಣ ಮುಂದುವರಿಸಿ, ಘಟನೆ ಜರುಗಿರುವ ಶಿಕ್ಷಣ ಸಂಸ್ಥೆಗಳನ್ನು ಒಂದು ವಾರ ಕಾಲ ಬಂದ್ ಮಾಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.
ಈ ನಡುವೆ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ಮೂರು ದಿನ ಸರ್ಕಾರ ರಜೆ ಘೋಷಿಸಿದೆ. ವಿವಾದ ಕುರಿತು ಹೈಕೋರ್ಟ್ ನಲ್ಲಿ ಮಂಗಳವಾರ ಆರಂಭವಾದ ವಿಚಾರಣೆ ನಾಳೆ ಬುಧವಾರವೂ ಮುಂದುವರಿಯಲಿದೆ. ಅಲ್ಲಿವರೆಗೆ ಶಾಂತಿಕಾಪಾಡುವಂತೆ ಸಿಎಂ ಬಸವರಾಜಬೊಮ್ಮಾಯಿ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ದಾರೆ.
