ಜೆಡಿಎಸ್ ಗೆ ಬೆಂಬಲ ಕೇಳಿದ್ದೇವೆ, ಏನು ನಿರ್ಧಾರ ಮಾಡ್ತಾರೋ ಕಾದು ನೋಡೋಣ: ಬಿ ಎಸ್ ಯಡಿಯೂರಪ್ಪ

ದಾವಣಗೆರೆ: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಗೆ ಬೆಂಬಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಈಗಾಗಲೇ ಬೆಂಬಲ ಕೇಳಿದ್ದೇವೆ. ಬೆಂಬಲಿಸುವುದು, ಬಿಡುವುದು ಜೆಡಿಎಸ್ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ನಗರದ ಜಿಎಂಐಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಪರಿಷತ್ ಚುನಾವಣೆಯಲ್ಲಿ 15 ಸ್ಥಾನಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಸ್ಪರ್ಧೆ ಮಾಡದ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲಿಸುವಂತೆ ಈಗಾಗಲೇ ಮನವಿ ಮಾಡಿದ್ದೇವೆ. ಜೆಡಿಎಸ್ ನವರು ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತರೋ ಕಾದು ನೋಡೊಣ ಎಂದು ತಿಳಿಸಿದರು.
ಈಗಾಗಲೇ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವರು, ಶಾಸಕರು ಪಕ್ಷದ ಮುಖಂಡರು ಪ್ರಚಾರ ನಡೆಸುತ್ತಿದ್ದಾರೆ ಎಂದು ಹೇಳಿದರು.
ಬಿ.ವೈ ವಿಜಯೇಂದ್ರಗೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಯಾವ ಸಲಹೆ ಸೂಚನೆ ನೀಡಿಲ್ಲ. ಪಕ್ಷದ ವರಿಷ್ಟರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಪಕ್ಷ ಸಂಘಟನೆಗೆ ಎಲ್ಲಾಕಡೆ ಸಂಚರಿಸುತ್ತಿದ್ದೇನೆ ಎಂದು ಮಾಹಿತಿ ನೀಡಿದರು.
ಕಾಯಬೇಕಷ್ಟೇ: ರಾಘವೇಂದ್ರ
ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ ಪರಿಷತ್ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ರಾಜ್ಯದಲ್ಲಿ ಬಿಜೆಪಿ ಬೆಂಬಲಿತ ಗ್ರಾ.ಪಂ ಸದಸ್ಯರು ಹೆಚ್ಚಾಗಿ ಇದ್ದಾರೆ.ಈ ಹಿನ್ನೆಲೆಯಲ್ಲಿ ನಾವು ಹೆಚ್ವಿನ ಸ್ಥಾನ ಗೆಲ್ಲುವ ವಿಶ್ವಾಸದಲ್ಲಿದ್ದೇವೆ ಎಂದು ಹೇಳಿದರು.
ಬಿ.ವೈ ವಿಜಯೇಂದ್ರಗೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ನಾವು ಭರವಸೆ ಯಾವಾಗಲೂ ಹೊಂದಿರಬೇಕೆಂದು ಹೇಳುವ ಮೂಲಕ ಸಹೋದರನಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಅಭಿಲಾಷೆ ವ್ಯಕ್ತಪಡಿಸಿದರು.



